ಯಡಿಯೂರಪ್ಪ ಅವರು ಬೆಂಗಳೂರು ನಗರದ ಸಬ್ ಅರ್ಬನ್ ರೈಲು ಯೋಜನೆಗೆ ಕೇಂದ್ರ ಸರ್ಕಾರವು ರೂ. 450 ಕೋಟಿ ಬಿಡುಗಡೆ ಮಾಡಿದೆ ಎಂದಿದ್ದಾರೆ. ಇದು ಅರ್ಧ ಸತ್ಯ ಮಾತ್ರ. ವಾಸ್ತವ ಬೇರೆ ಇದ್ದು ನಾಡಿಗೆ ಆಗುತ್ತಿರುವ ಅನ್ಯಾಯ ಮುಚ್ಚಿಟ್ಟಿರುವುದು ಯಡಿಯೂರಪ್ಪ ಅವರೇ ಹೊರತು ನಾನಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ಬೆಂಗಳೂರು :
ಯಡಿಯೂರಪ್ಪ ಅವರು ಬೆಂಗಳೂರು ನಗರದ ಸಬ್ ಅರ್ಬನ್ ರೈಲು ಯೋಜನೆಗೆ ಕೇಂದ್ರ ಸರ್ಕಾರವು ರೂ. 450 ಕೋಟಿ ಬಿಡುಗಡೆ ಮಾಡಿದೆ ಎಂದಿದ್ದಾರೆ. ಇದು ಅರ್ಧ ಸತ್ಯ ಮಾತ್ರ. ವಾಸ್ತವ ಬೇರೆ ಇದ್ದು ನಾಡಿಗೆ ಆಗುತ್ತಿರುವ ಅನ್ಯಾಯ ಮುಚ್ಚಿಟ್ಟಿರುವುದು ಯಡಿಯೂರಪ್ಪ ಅವರೇ ಹೊರತು ನಾನಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 2018-19ರ ಕೇಂದ್ರ ಬಜೆಟ್ ಭಾಷಣದಲ್ಲಿ ಅಂದಿನ ವಿತ್ತ ಸಚಿವರಾಗಿದ್ದ ಅರುಣ್ ಜೇಟ್ಲಿ ಅವರು ರೂ.17,000 ಕೋಟಿ ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಕೇಂದ್ರ ಸರ್ಕಾರವು ಯೋಜನೆ ರೂಪಿಸಲಿದೆ ಎಂದು ಹೇಳಿದ್ದರು. ಕೇಂದ್ರ ಸರ್ಕಾರದ ಈ ಘೋಷಣೆಯನ್ನು ಬಿಜೆಪಿ ತನ್ನ 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಕೂಡ ಸೇರಿಸಿಕೊಂಡಿತ್ತು. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ, “ಕೇಂದ್ರ ಸರ್ಕಾರ ಘೋಷಿಸಿದ ರೂ.17,000 ಕೋಟಿ ಅನುದಾನ ಬಳಸಿಕೊಂಡು ಬೆಂಗಳೂರಿನ ಉಪನಗರ ರೈಲು ಜಾಲವನ್ನು ಪೂರ್ಣಗೊಳಿಸುತ್ತೇವೆ” ಎಂದು ಹೇಳಿತ್ತು. ಇದರರ್ಥ ಕೇಂದ್ರ ಸರ್ಕಾರವು ಸಬ್ ಅರ್ಬನ್ ರೈಲು ಯೋಜನೆಗೆ ಬಜೆಟ್ ನಲ್ಲಿ 17,000 ಕೋಟಿ ರೂ. ನಿಗದಿಪಡಿಸಿದೆ ಎಂದು ರಾಜ್ಯ ಬಿಜೆಪಿಯೇ ಒಪ್ಪಿಕೊಂಡಿತ್ತು. ಆದರೆ ಆ ಆರ್ಥಿಕ ವರ್ಷ ಬಿಡಿಗಾಸು ಹಣವನ್ನು ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರಲಿಲ್ಲ ಎಂದಿದ್ದಾರೆ.
2019ರ ಜುಲೈನಲ್ಲಿ ಆಪರೇಷನ್ ಕಮಲದ ಮೂಲಕ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬಂದ ಕರ್ನಾಟಕ ಬಿಜೆಪಿ, ಜನರಿಗೆ ದ್ರೋಹ ಬಗೆಯಲು ಮುಂದಾಯಿತು. ಕೇಂದ್ರ ಸರ್ಕಾರವು ಯೋಜನೆಗೆ ಅನುದಾನ ಕೊಡಲು ಮನಸ್ಸಿಲ್ಲದೆ ಫೆಬ್ರವರಿ 2020ರಲ್ಲಿ ಮಂಡಿಸಿದ 2020-21ರ ಕೇಂದ್ರ ಬಜೆಟ್ ನಲ್ಲಿ ಸಬ್ ಅರ್ಬನ್ ರೈಲು ಯೋಜನೆಗೆ ತಾನು ಕೇವಲ 20% ಅನುದಾನ ನೀಡುವುದಾಗಿ, ಮತ್ತೆ 20% ರಾಜ್ಯ ಸರ್ಕಾರ ಹಾಗೂ ಉಳಿದ 60% ಹಣವನ್ನು ರಾಜ್ಯಕ್ಕೆ ಸಾಲ ಕೊಡಿಸುವುದಾಗಿ ಘೋಷಿಸಿತು. ಅಂದಿನ ರಾಜ್ಯ ಬಿಜೆಪಿ ಸರ್ಕಾರ ಇದಕ್ಕೆ ಚಕಾರವೆತ್ತದೆ ಸಮ್ಮತಿಸಿತು. ಈ ಹೊಸ ಬದಲಾವಣೆಯ ನಂತರ
2022-23ರಲ್ಲಿ ಕೇಂದ್ರ ಸರ್ಕಾರ ರೂ.450 ಕೋಟಿ ಅನುದಾನವನ್ನು ನಿಗದಿ ಮಾಡಿತ್ತು, ಆದರೆ ಕೊಟ್ಟಿದ್ದು ರೂ.50 ಕೋಟಿ ಮಾತ್ರ. ನಂತರ ಪ್ರಸಕ್ತ ಸಾಲಿನಲ್ಲಿ ರೂ.1350 ಕೋಟಿ ನಿಗದಿ ಮಾಡಿ, ಈ ವರೆಗೆ ಕೇವಲ ರೂ.450 ಕೋಟಿ ಬಿಡುಗಡೆ ಮಾಡಿದೆ ಎಂದು ಅರೋಪಿಸಿದ್ದಾರೆ.
ಅಂದು ಮೋದಿ ಸರ್ಕಾರದ ಜೊತೆ ಸೇರಿ ನಾಡಿಗೆ ಅನ್ಯಾಯ ಮಾಡಿದ್ದ ಯಡಿಯೂರಪ್ಪ ಅವರೇ ಇಂದು ಸಬ್ ಅರ್ಬನ್ ರೈಲು ಯೋಜನೆಗೆ ಕಾಂಗ್ರೆಸ್ ನಿರಾಸಕ್ತಿ ತೋರುತ್ತಿದೆ ಎಂದು ಆರೋಪ ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದು ಹೇಳಿದ್ದಾರೆ.
ಠೀಕೆಗಳು 0